• March 14, 2026

‘ರೇಮೊ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ ಶಿವರಾಜ್ ಕುಮಾರ್

ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ ಆಗಲಿ ಅಂತ ದೇವರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಇಶಾನ್ ಹಾಗೂ ಆಶಿಕಾ ಮುದ್ದಾಗಿ ಕಾಣುತ್ತಿದ್ದಾರೆ.  ನಿರ್ದೇಶಕ ಪವನ್ ಒಡೆಯರ್ ಬಗ್ಗೆ ಹೇಳುವಂತೆಯೇ ಇಲ್ಲ. ಸಿ.ಆರ್. ಮನೋಹರ್ ಅವರಂತಹ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬೇಕು’ ಎಂದು ಶಿವರಾಜಕುಮಾರ್ ಹೇಳಿದರು. ‘ರೇಮೊ’ ಚಿತ್ರದ ಕೆಲಸ ಶುರುವಾಗಿ 3 ವರ್ಷ ಆಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನನ್ನನ್ನು ಚಿತ್ರರಂಗಕ್ಕೆ ಬರಲು ಹೇಳಿದ್ದು ಶಿವಣ್ಣ. ಇವತ್ತು ಅವರಿಂದಲೇ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನವೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಅಂದೇ ನಮ್ಮ ಚಿತ್ರವನ್ನು ನೋಡುವುದಾಗಿ ಶಿವಣ್ಣ ಹೇಳಿದ್ದಾರೆ.  ಅವರೇ ನನಗೆ ಸ್ಫೂರ್ತಿ. ನಾನು ಎಷ್ಟೇ ಸಿನಿಮಾ ಮಾಡಬಹುದು. ಆದರೆ ‘ರೇಮೊ’ ಚಿತ್ರ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ ಎನ್ನುತ್ತಾರೆ ನಾಯಕ ಇಶಾನ್. ನಟಿ ಆಶಿಕಾ ರಂಗನಾಥ್ ಅವರಿಗೂ ‘ರೇಮೊ’ ಚಿತ್ರ ವಿಶೇಷ ಅಂತೆ. ‘ಇಷ್ಟು ದಿನ ನನ್ನನ್ನು ಕ್ಯೂಟ್ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಆದರೆ ಈ ಸಿನಿಮಾದಲ್ಲಿನ ಪಾತ್ರ ಭಿನ್ನವಾಗಿದೆ.  ಈವರೆಗೆ ನಾನು ಮಾಡಿದ ಪಾತ್ರಗಳಲ್ಲಿ ಇದೇ ಬೆಸ್ಟ್. ಹೀರೋಗೆ ಸಮನಾಗಿ ಇರುವಂತಹ ಪಾತ್ರ ನನಗೆ ಸಿಕ್ಕಿದೆ. ಅದಕ್ಕೆ ನನ್ನನ್ನು ಆಯ್ಕೆ ಮಾಡಿದ ಪವನ್ ಒಡೆಯರ್   ಅವರಿಗೆ ಧನ್ಯವಾದಗಳು’ ಎನ್ನುತ್ತಾರೆ ಆಶಿಕಾ ರಂಗನಾಥ್. ಪ್ರೀತಿಯಲ್ಲಿ ಹಲವು ವಿಧಗಳಿದೆ. ಅದರಲ್ಲಿ ನಾನು ಮ್ಯೂಸಿಕಲ್ ಲವ್ ಸ್ಟೋರಿ ಆಯ್ಕೆ ಮಾಡಿಕೊಂಡಿದ್ದೀನಿ. ಈ ಚಿತ್ರದಲ್ಲಿ ಎಮೋಷನ್ ಸಹ ಇದೆ. ವೈದಿ ಅವರ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರವನ್ನು ಮತ್ತಷ್ಟು ಸುಂದರವಾಗಿಸಿದೆ. ಇಶಾನ್ ಹಾಗೂ ಆಶಿಕಾ ರಂಗನಾಥ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಪವನ್ ಒಡೆಯರ್. ನಿರ್ಮಾಪಕ ಸಿ.ಆರ್.ಮನೋಹರ್  ಶಿವರಾಜಕುಮಾರ್ ಅವರನ್ನು ಸನ್ಮಾನಿಸಿದರು. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್ ಅವರು ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ,  ವೈದಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now